ಬಡವರ ಬೆವರ ಹನಿ ಇಂಟರ್ನೆಟ್ ಆಧಾರಿತವಾದರೆ ಹೇಗೆ…? ಭರವಸೆ ಕಳೆದುಕೊಳ್ಳುವ ಮುನ್ನ ಅಂಚೆ ಸೇವೆಯಲ್ಲಿ ಸುಧಾರಣೆ ಬೇಕಿದೆ

July 7, 2019
8:00 AM

ಗ್ರಾಮೀಣ ಭಾಗದಲ್ಲಿ ಅಂಚೆ ಕಚೇರಿಗಳೇ ಬಡವರ ಪಾಲಿನ ಬ್ಯಾಂಕ್. ದುಡಿದ ಹಣ ಅಂಚೆ ಕಚೇರಿಯ ಉಳಿತಾಯ ಖಾತೆಯಲ್ಲಿದ್ದರೆ ಸೇಪ್ ಎಂಬ ಭಾವನೆ ಗ್ರಾಮೀಣ ಜನರಲ್ಲಿದೆ. ಈಗ ಇಂಟರ್ನೆಟ್ ಆಧಾರಿತವಾಗಿಯೇ ಹಣ ಪಡೆಯುವ ವ್ಯವಸ್ಥೆ ಬಂದ ಬಳಿಕ ಗ್ರಾಮೀಣ ಜನರು ಹಣಕ್ಕಾಗಿ 2-3 ದಿನ ಓಡಾಟ ನಡೆಸಬೇಕಾದ ಸ್ಥಿತಿ ಬಂದಿದೆ. ಆಗಾಗ ಕೈಕೊಡುವ ಇಂಟರ್ನೆಟ್, ವಿದ್ಯುತ್ ಕಾರಣದಿಂದ ವ್ಯವಸ್ಥೆ ಹದಗೆಡುತ್ತಿದೆ. ಗ್ರಾಮೀಣ ಬ್ಯಾಂಕ್, ಜನರ ವಿಶ್ವಾಸದ ಮೇಲೆ ಹೊಡೆತ ಬೀಳುತ್ತಿದೆ. ಎಚ್ಚೆತ್ತುಕೊಳ್ಳದೇ ಹೋದರೆ ಗ್ರಾಮೀಣ ಬ್ಯಾಂಕ್ ಸೇವೆ ಸ್ಥಗಿತಗೊಳಿಸುವ ದಿನ ದೂರವಿಲ್ಲ. ಮನಸ್ಸಿದ್ದರೆ ಅಂಚೆ ಕಚೇರಿ ಮೂಲಕ ಬಹಳಷ್ಟು ಸೇವೆಯನ್ನು ಗ್ರಾಮೀಣ ಭಾಗದ ಜನರಿಗೆ ನೀಡಲು ಸಾಧ್ಯವಿದೆ. ಆರ್ ಡಿ, ಉಳಿತಾಯ ಖಾತೆ, ಜೀವವಿಮೆ, ವಿದ್ಯುತ್ ಬಿಲ್, ದೂರವಾಣಿ ಬಿಲ್ ಸೇರಿದಂತೆ ಹಲವಾರು ಸೇವೆ ಸುಧಾರಣೆಗೂ ಅವಕಾಶ ಇದೆ. ಇಂತಹ ಸೇವೆ ಈಗ ಕೈಕೊಡುತ್ತಿದೆ, ಭರವಸೆ ನಿರಾಸೆಯಾಗುತ್ತಿದೆ.  ಜನಪ್ರತಿನಿಧಿಗಳು, ಅಧಿಕಾರಿಗಳು ಗ್ರಾಮೀಣ ಜನರ ಈ ಸಂಕಷ್ಟದತ್ತ ಗಮನಹರಿಸಬೇಕಿದೆ.

ಸುಳ್ಯ: ಬಹುತೇಕ ಅಂಚೆ ಕಚೇರಿಗಳಲ್ಲಿ  ಈಗ ವ್ಯವಹಾರ ಕಷ್ಟವಾಗಿದೆ. ಗ್ರಾಮೀಣ ಭಾಗದ ಬ್ಯಾಂಕ್, ಜನರ ಜೀವನಾಡಿಯಾಗಿರುವ ಅಂಚೆ ಕಚೇರಿಗಳಲ್ಲಿ  ಈಗ ಇಂಟರ್ನೆಟ್ ಕೈಕೊಟ್ಟರೆ ಹಣವೂ ಸಿಗುವುದಿಲ್ಲ. ಈಗ ಬಡವರ ಬೆವರ ಹನಿ ಈಗ ಇಂಟರ್ನೆಟ್ ಆಧಾರಿತವಾಗಿದೆ. ಕಷ್ಟಕಾಲಕ್ಕೆಂದು ದುಡಿದು ಕೂಡಿಟ್ಟ ಹಣ ಇಂಟರ್ನೆಟ್ ಆಧಾರಿತವಾದರೆ ಗ್ರಾಮೀಣ ಭಾಗದಲ್ಲಿ ಕಷ್ಟ. ಹೀಗಿದ್ದರೂ ಜನರು ಮಾತನಾಡದೆ ಮೌನವಾಗಿದ್ದರೆ. ಅಂಚೆ ಕಚೇರಿಯಲ್ಲಿ ವ್ಯವಹಾರ ಕಡಿಮೆಯಾಗಿದೆ. ಹೀಗಾದರೆ ಬಿ ಎಸ್ ಎನ್ ಎಲ್ ಹಾದಿಯನ್ನೇ ಅಂಚೆ ಕಚೇರಿ ಹಿಡಿಯುವುದು ನಿಶ್ಚಿತ. ಅದಕ್ಕೂ ಮುನ್ನ ಜನಪ್ರತಿನಿಧಿಗಳು ಧ್ವನಿ ಎತ್ತಬೇಕಿದೆ.

Advertisement

ಒಂದು ಕಾಲದಲ್ಲಿ ಅಂಚೆ ಕಚೇರಿ ಎಂದರೆ ಸೇಫ್ ಎಂಬ ಭಾವನೆ ಗ್ರಾಮೀಣ ಜನರಲ್ಲಿ ಇತ್ತು. ತಾವು ದುಡಿದ ಹಣ, ಬೆವರಿನ ಹನಿ ಅಂಚೆ ಕಚೇರಿಯ ಉಳಿತಾಯ ಖಾತೆ ಸೇರಿದರೆ ಚಿಂತೆ ಇಲ್ಲ. ಬಡ್ಡಿ ಬಗ್ಗೆ ಲೆಕ್ಕ ಹಾಕದೆ ಅದು ನಮ್ಮ ಬ್ಯಾಂಕ್ ಎಂದು ಮನೆಗೊಂದರಂತೆ ಖಾತೆ ತೆರೆದು ಜನರು ವ್ಯವಹಾರ ಮಾಡುತ್ತಿದ್ದರು. ಪೋಸ್ಟ್ ಮಾಸ್ಟರ್, ಪೋಸ್ಟ್ ಮ್ಯಾನ್ ಇಬ್ಬರೇ ಅವರ ವಿಶ್ವಾಸದ ಕೊಂಡಿಗಳು. ಇಂದಿಗೂ ಹಲವಾರು ಮಂದಿ ಅಂಚೆ ಕಚೇರಿ ಬಿಟ್ಟು ಉಳಿದ ಕಡೆ ಉಳಿತಾಯ ಖಾತೆ ಮಾಡದ ಜನರು ಇದ್ದಾರೆ. ಆದರೆ ಈಚೆಗೆ ಕೆಲವು ಸಮಯಗಳಿಂದ ಅಂತಹ ಮಂದಿಗೂ ನೋವಾಗಲು ಶುರುವಾಗಿದೆ. ಇದೆಂತಾ ಕತೆ, “ನಮ್ಮ ಹಣಕ್ಕೆ ಅಲೆದಾಟ ಮಾಡಬೇಕಾ” ಎಂದು ಕೇಳಲು ಶುರು ಮಾಡಿದ್ದಾರೆ. ಕಾರಣ ಇಷ್ಟೇ, ಈಗ ಇಂಟರ್ನೆಟ್ ಆಧಾರಿತವಾಗಿಯೇ ವ್ಯವಹಾರ ನಡೆಯಬೇಕು. ಒಂದು ವೇಳೆ ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ಟವರ್ ಆಫ್ ಆಗುತ್ತದೆ. ಗ್ರಾಮೀಣ ಭಾಗದ ಬಹುತೇಕ ಕಡೆ ಬಿ ಎಸ್ ಎನ್ ಎಲ್ ಬಿಟ್ಟು ಬೇರೆ ಸಿಗ್ನಲ್ ಇಲ್ಲ. ಅದರ ಜೊತೆ ಅಂಚೆ ಕಚೇರಿಗೆ ನೀಡಿದ ಉಪಕರಣದಲ್ಲಿ ಬಿ ಎಸ್ ಎನ್ ಎಲ್ ಸಿಮ್ ಮಾತ್ರವೇ ಕೊಡಲಾಗಿದೆ. ಹೀಗಾಗಿ ಸರಿಯಾಗಿ 3 ಜಿ ವ್ಯವಸ್ಥೆ ಇದ್ದರೆ ಮಾತ್ರವೇ ಅಂಚೆ ಕಚೇರಿ ವ್ಯವಹಾರ ನಡೆಯುತ್ತದೆ.  ಹೀಗಾಗಿ ಈಗ ಎಲ್ಲಾ ಕಡೆ ಬಿ ಎಸ್ ಎನ್ ಎಲ್ ಕೈಕೊಡುತ್ತಿದೆ. ಈ ಕಾರಣದಿಂದ ಅಂಚೆ ಕಚೇರಿ ಕೆಲಸಗಳು ನಡೆಯುವುದಿಲ್ಲ. ಮುಖ್ಯ ಕಚೇರಿಯಿಂದ ಹಣದ ಬ್ಯಾಗ್ ಅಥವಾ ಇತರ ಯಾವುದೇ ಬ್ಯಾಗ್ ಬಂದರೆ ಅದನ್ನು ತೆರೆಯಬೇಕಾದರೆ ಇಂಟರ್ನೆಟ್ ಬೇಕು. ಅದಾದ ಬಳಿಕ ಹಣ ಪಾವತಿ ಮಾಡಲು ಇಂಟರ್ನೆಟ್ ಬೇಕು. ಅದು ಯಾವುದೇ ಬೇರೆ ಇಂಟರ್ನೆಟ್ ಆಗುವುದಿಲ್ಲ. ಬಿ ಎಸ್ ಎನ್ ಎಲ್ ಸಿಗ್ನಲ್ ಇರಲೇಬೇಕು. ಹೀಗಾಗಿ ಕೆಲಸವಾಗುವುದಿಲ್ಲ. ಇತ್ತೀಚೆಗೆ ಸುಳ್ಯ ತಾಲೂಕಿನ ನಡುಗಲ್ಲು ಬಿ ಎಸ್ ಎನ್ ಎಲ್ ಟವರ್ ವಾರಗಳ ಕಾಲ ಆಫ್ ಆಗಿತ್ತು. ಅಲ್ಲಿನ ಅಂಚೆ ಕಚೇರಿ ಸ್ಥಿತಿ ಹೇಗಿರಬೇಡ ಊಹಿಸಿ. ಅಲ್ಲಿ ಬೇರೆ ನೆಟ್ವರ್ಕ್ ಇದೆ, ಆದರೂ ಉಪಯೋಗಿಸುವ ಹಾಗಿಲ್ಲ. ಅಲ್ಲಿನ ಪೋಸ್ಟ್ ಮಾಸ್ಟರ್ ಸಮೀಪದ ಟವರ್ ಗೆ ಬಂದು ಆನ್ ಮಾಡಿ ಜನರಿಗೆ ಸೇವೆ ನೀಡಿದ್ದರು. ಅಂಚೆ ಕಚೇರಿಯ  ಕೆಲವರು ಬಿಡಿ, ಅನೇಕ ಸಿಬಂದಿಗಳು ಉತ್ತಮವಾದ ಸೇವೆಯನ್ನು ನೀಡುತ್ತಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಇಂದಿಗೂ ವಿಶ್ವಾಸ ಉಳಿಸಿಕೊಂಡಿದೆ, ಇಷ್ಟೆಲ್ಲಾ ಅವ್ಯವಸ್ಥೆಯಾದರೂ ಒಂದೇ ಒಂದು ಪ್ರತಿಭಟನೆ, ಧ್ವನಿ ಎತ್ತುತ್ತಿಲ್ಲ. ಹಾಗೆಂದು ಇದೇ ಗ್ರಾಮೀಣ ಜನರ ದೌರ್ಬಲ್ಯವೂ ಅಲ್ಲ.

 

Advertisement
( ಸಾಂದರ್ಭಿಕ ಚಿತ್ರ )

 

ಹಾಗೆಂದು ಸ್ವಲ್ಪ ತುರ್ತಾಗಿ ಹಣ ಬೇಕಾದ ಗ್ರಾಮೀಣ ಭಾಗದ ಮಂದಿ ಮುಖ್ಯ ಕಚೇರಿಗೆ ಬಂದರೆ ಅಲ್ಲೂ ಹಾಗೆ, ಇಂಟರ್ನೆಟ್ ಇಲ್ಲದೇ ಇದ್ದರೆ ಹಣವೂ ಇಲ್ಲ…!. ಹೀಗಾಗಿ ಈಗ ಅಂಚೆ ಕಚೇರಿಯಲ್ಲಿ ಡಿಪಾಸಿಟ್ ಇರಿಸಿದ ಹಣ ಪಡೆಯಲು ವಾರಗಳ ಮುಂದೆಯೇ ಪ್ಲಾನ್ ಮಾಡಬೇಕಾಗುತ್ತದೆ. ಆದರೆ ಗ್ರಾಮೀಣ ಭಾಗದ ಜನರಿಗೆ ಇದೆಲ್ಲಾ ಹೇಗೆ ತಿಳಿಯುತ್ತದೆ.

Advertisement

ಇದೆಲ್ಲಾ ಸಮಸ್ಯೆ ಗ್ರಾಮೀಣ ಭಾಗದ ಜನರಿಗೆ ಮಾತ್ರಾ. ನಗರದ ಮಂದಿ ಅಂಚೆ ಕಚೇರಿಯನ್ನೇ ಅವಲಂಬನೆ ಮಾಡುವುದಿಲ್ಲ. ಇತರ ಬ್ಯಾಂಕ್ ಗಳಿಗೆ ತೆರಳುತ್ತಾರೆ. ನಗರದಲ್ಲಿ ಇಂಟರ್ನೆಟ್ ವ್ಯವಸ್ಥೆ ಕೈಕೊಡುವುದೂ ಕಡಿಮೆ. ಇತ್ತೀಚೆಗೆ ಬೆಳ್ಳಾರೆ ಬಳಿಯ ಮುಕ್ಕೂರು ಅಂಚೆ ಕಚೇರಿ ಕೂಡಾ ಇಂಟರ್ನೆಟ್ ಕಾರಣದಿಂದಲೇ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಮೂಲಗಳು ಹೇಳಿತ್ತು. ಇಂಟರ್ನೆಟ್ ಲಭ್ಯವಾಗುವ ಕಡೆ ಅಂಚೆ ಕಚೇರಿ ಸ್ಥಾಪಿಸುವ ಉದ್ದೇಶವಿತ್ತು.

ಅದಕ್ಕೂ ಮೊದಲು ಸಣ್ಣ ಸಂದೇಹ ವ್ಯಕ್ತವಾಗುತ್ತದೆ, ಎಲ್ಲಾ ಅಂಚೆ ಕಚೇರಿಗಳಿಗೆ ಇಂಟರ್ನೆಟ್ ಉಪಯೋಗಿಸಲು ಸ್ವೈಪ್ ಮಾದರಿಯ ಯಂತ್ರ ನೀಡಿದ್ದಾರೆ, ಇದರ ಬೆಲೆ 1 ಲಕ್ಷಕ್ಕೂ ಅಧಿಕ ಎಂದು ಸಿಬಂದಿಗಳು ಹೇಳುತ್ತಾರೆ. ವಾಸ್ತವಾಗಿ ಅಷ್ಟೊಂದು ಹಣ ಆ ಯಂತ್ರಕ್ಕೂ ಇರುವುದಿಲ್ಲ. ಅಲ್ಲೇನೋ ನಡೆದಿರಬೇಕು ಎಂದು ಅನುಮಾನ ವ್ಯಕ್ತವಾಗುತ್ತದೆ. ಅದಿರಲಿ, ಇಲ್ಲಿ ಈ ಯಂತ್ರದ ಬದಲಾಗಿ ಲ್ಯಾಪ್ ಟಾಪ್ ನೀಡಿ ಯಾವುದೇ ಇಂಟರ್ನೆಟ್ ಬಳಕೆಗೆ ವ್ಯವಸ್ಥೆ ಮಾಡಿದ್ದರೆ ಇಷ್ಟು ದೊಡ್ಡ ಸಮಸ್ಯೆಯಾಗುತ್ತಿರಲಿಲ್ಲ ಎಂಬುದು ಸಿಬಂದಿಗಳು ಗುಟ್ಟಾಗಿ ಹೇಳುತ್ತಾರೆ.

Advertisement

ಅತಿ ಶೀಘ್ರದಲ್ಲೇ ಈ ವ್ಯವಸ್ಥೆ ಸರಿಯಾಗದೇ ಇದ್ದರೆ ಅಂಚೆ ಕಚೇರಿಯಲ್ಲಿ ವ್ಯವಹಾರ ಕುಂಠಿತವಾಗಿ ಲಾಭದಲ್ಲಿರುವ ಗ್ರಾಮೀಣ ಜನರ ಜೀವನಾಡಿಯಾದ ಬ್ಯಾಂಕ್ ನಷ್ಟದತ್ತ ಸಾಗುವುದು ಖಚಿತ, ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕಡೆಗೆ ಗಮನಹರಿಸುವುದು ಉತ್ತಮ.

ಗ್ರಾಮೀಣ ಭಾರತ ಎನ್ನುತ್ತಾ ಬಿ ಎಸ್ ಎನ್ ಎಲ್ ವ್ಯವಸ್ಥೆ ಹದಗೆಡುತ್ತದೆ, ಇದೀಗ ಗ್ರಾಮೀಣ ಭಾರತ ಎನ್ನುತ್ತಾ ಅಂಚೆ ಕಚೇರಿಯೂ ಶಿಥಿಲವಾಗುತ್ತದೆ, ಗ್ರಾಮೀಣ ಭಾರತ ಎನ್ನುತ್ತಾ ಬಹುತೇಕ ವ್ಯವಸ್ಥೆಗಳು ಶಿಥಿಲವಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನಿಸಿ ಸಂಬಂಧಿತರ ಗಮನಕ್ಕೆ ತಂದರೆ ಸುಧಾರಣೆಯಾಗುವ ಭರವಸೆ ಇದೆ, ವಿಶ್ವಾಸ ಇದೆ. ಜಾತಿ, ಧರ್ಮದ ರಾಜಕಾರಣ ಮಾಡುವ ಬದಲಿಗೆ ಗ್ರಾಮೀಣ ಸೇವೆಯ ಕಡೆಗೆ ಆದ್ಯತೆ ನೀಡುವ ಮಂದಿ ಮುಂದೆ ಬರಲಿ.

Advertisement

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror